
ಬೆಂಗಳೂರು, ಜ.16: ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಪರ ಕಾಳಜಿ ಹಾಗೂ ಹೋರಾಟ ಮನೋಭಾವ ಹೊಂದಿರುವ ಕೆ. ಗೋವರ್ಧನ ಅವರನ್ನು ಪ್ರಶ್ನೆ ಫೌಂಡೇಷನ್ (ರಿ) ಸಂಘಟನೆಯ ರಾಜ್ಯ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಮಾಧ್ಯಮಗಳ ಮೂಲಕ ಪ್ರಶ್ನೆ ಫೌಂಡೇಷನ್ ಸ್ಥಾಪಕ ಅಧ್ಯಕ್ಷ ಅರುಣ್ ಭುಪಾಲ್ ಈ ನೇಮಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಮಾತಾಡಿದ ಅವರು ಜನಪರ ಧ್ವನಿ ನಿರಂತರವಾಗಿರಲಿದೆ ಎಂದು ಹೇಳಿದ್ದಾರೆ.

ಸಂವಿಧಾನಾತ್ಮಕ ಮೌಲ್ಯಗಳು, ನಾಗರಿಕ ಹಕ್ಕುಗಳು ಹಾಗೂ ಜನಸಾಮಾನ್ಯರ ಪ್ರಶ್ನಿಸುವ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರಶ್ನೆ ಫೌಂಡೇಶನ್ ಕಾರ್ಯ ನಿರ್ವಹಿಸುತ್ತಿದೆ. ಸಮಾಜದ ವಿವಿಧ ವರ್ಗಗಳ ಸಮಸ್ಯೆಗಳಿಗೆ ಧ್ವನಿಯಾಗುವ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸಂಸ್ಥೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ.
ಸಂವಿಧಾನ, ಕಾನೂನು, ಶಿಕ್ಷಣ, ಆರೋಗ್ಯ, ಸಾರ್ವಜನಿಕ ಸೇವೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜನರಿಗೆ ಎದುರಾಗುವ ಅನ್ಯಾಯಗಳ ವಿರುದ್ಧ ಕಾನೂನುಬದ್ಧ ಹೋರಾಟ, ಜಾಗೃತಿ ಕಾರ್ಯಕ್ರಮಗಳು, ಸಂವಾದಗಳು ಹಾಗೂ ಮಾರ್ಗದರ್ಶನ ಶಿಬಿರಗಳನ್ನು ಆಯೋಜಿಸುವ ಉದ್ದೇಶವನ್ನು ಪ್ರಶ್ನೆ ಫೌಂಡೇಶನ್ ಹೊಂದಿದೆ. ಸಂಸ್ಥೆಯು ಮುಂದಿನ ದಿನಗಳಲ್ಲಿ ಯುವಜನರಲ್ಲಿ ಸಂವಿಧಾನ ಜಾಗೃತಿ ಹೆಚ್ಚಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಸಮಾಜದ ಎಲ್ಲ ವರ್ಗಗಳ ಸಹಕಾರವನ್ನು ಕೋರುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.





