ಬೆಂಗಳೂರು, ಜೂ.01: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಜನ್ಮದಿನದ ಅಂಗವಾಗಿ ‘ನಮ್ಮ ಭಾಷೆ ನಮ್ಮ ಕನ್ನಡ’ ಮಕ್ಕಳ ಚಲನಚಿತ್ರದ ವಿಶೇಷ ಪ್ರದರ್ಶನವನ್ನು ಜೂನ್ 12ರಂದು ಆಯೋಜಿಸಲಾಗಿದೆ.
ಮಲ್ಲೇಶ್ವರದ 18ನೇ ಕ್ರಾಸ್ನಲ್ಲಿರುವ ರೇಣುಕಾಂಬಾ ಸ್ಟುಡಿಯೋದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಟಿ.ಎ. ನಾರಾಯಣಗೌಡ ಉದ್ಘಾಟನೆ ನೆರವೇರಿಸಲಿದ್ದಾರೆ.
ಹಿರಿಯ ವಿದ್ವಾಂಸ ಡಾ. ಹಂಪ ನಾಗರಾಜಯ್ಯ, ಮಾಜಿ ಸಚಿವ ಹಾಗೂ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂದ್ಯಾ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ ಹಾಗೂ ಡಾ. ಶಿವರಾಜಕುಮಾರ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಕೆ. ಪಾಟೀಲ, ಶಿವರಾಜ ತಂಗಡಗಿ, ಮಧು ಬಂಗಾರಪ್ಪ, ಸತೀಶ ಜಾರಕಿಹೊಳಿ, ಸಂತೋಷ ಲಾಡ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಮಾಜಿ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲಾ, ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಹಿರಿಯ ಪತ್ರಕರ್ತ ಜಿ.ಎನ್. ಮೋಹನ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿರುವರು.
ಚಿತ್ರದ ನಿರ್ಮಾಪಕರಾದ ಮರಿರಾಜ ಭಜಂತ್ರಿ ನವಲಿ, ಸಹ ನಿರ್ಮಾಪಕರಾದ ಡಾ. ಸಂಗಮೇಶ ಕಲ್ಯಾಣಿ, ರೇಖಾ ಎಸ್. ಜಾವೂರ, ವೆಂಕಟೇಶ ಯಡಿಯಾಪೂರ ಹಾಗೂ ತಾಯಣ್ಣ ಮಡ್ಡಿ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ್ದಾರೆ. ನಿರ್ದೇಶಕ ಶ್ರೀಧರ ಜಾವೂರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ನಿಂಗನಗೌಡ ಎಸ್. ಮಾಲಿಪಾಟೀಲ ನಿರೂಪಿಸಲಿದ್ದಾರೆ.
ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಮಕ್ಕಳಲ್ಲಿ ಕನ್ನಡಾಭಿಮಾನ ಬೆಳೆಸುವ ಉದ್ದೇಶದಿಂದ ನಿರ್ಮಿಸಲಾದ ಈ ಚಲನಚಿತ್ರದ ವಿಶೇಷ ಪ್ರದರ್ಶನಕ್ಕೆ ಸಾರ್ವಜನಿಕರು ಹಾಗೂ ಕನ್ನಡಾಭಿಮಾನಿಗಳನ್ನು ಆಹ್ವಾನಿಸಲಾಗಿದೆ.




