ಚಿಕ್ಕಬಳ್ಳಾಪುರ, ಜೂನ್ 12: ರಾಜ್ಯಾದ್ಯಂತ 5 ಕೋಟಿ ಸಸಿಗಳನ್ನು ನೆಡುವುದು ಹಾಗೂ ಕೆರೆ, ಕೊಳ, ನದಿ ಸೇರಿದಂತೆ ಜಲಮೂಲಗಳ ಪುನರುಜ್ಜೀವನ, ಸಂರಕ್ಷಣೆ ಮತ್ತು ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಮಹತ್ವಾಕಾಂಕ್ಷಿ ಪರಿಸರ ಅಭಿಯಾನಕ್ಕೆ ಜೂನ್ 13ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಆವರಣದಲ್ಲಿ ಚಾಲನೆ ದೊರೆಯಲಿದೆ.
ಕರ್ನಾಟಕ ಹೈಕೋರ್ಟ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ-ಚಿಕ್ಕಬಳ್ಳಾಪುರ, ವಕೀಲರ ಸಂಘ-ಚಿಕ್ಕಬಳ್ಳಾಪುರ, ಪ್ರಶಾಂತಿ ಬಾಲಮಂದಿರ ಟ್ರಸ್ಟ್, ವಂದೇ ಭಾರತಂ ಫೌಂಡೇಶನ್ ಹಾಗೂ ಧಾರೆ ಫೌಂಡೇಶನ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪೋಷಕರಾದ ನ್ಯಾಯಮೂರ್ತಿ ವಿಭು ಬಖ್ರು ಅವರು ಸಸಿ ನೆಡುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕೆಎಸ್ಎಲ್ಎಸ್ಎ ಕಾರ್ಯನಿರ್ವಾಹಕ ಅಧ್ಯಕ್ಷೆ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಅಧ್ಯಕ್ಷ ಡಾ. ಬಿ.ಎನ್. ನರಸಿಂಹಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ನ್ಯಾಯಾಧೀಶ ಹಾಗೂ ಡಿಎಲ್ಎಸ್ಎ ಅಧ್ಯಕ್ಷ ಟಿ.ಪಿ. ರಾಮಲಿಂಗೇಗೌಡ, ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ್ ರೆಡ್ಡಿ, ಕೆಎಸ್ಎಲ್ಎಸ್ಎ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ, ಧಾರೆ ಫೌಂಡೇಶನ್ ನಿರ್ದೇಶಕ ಡಿ.ಎಂ. ಪೂರ್ಣೇಶ್ ಹಾಗೂ ವಂದೇ ಭಾರತಂ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಬಿಜ್ಜವರ ಎಚ್. ಲೋಕೇಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ‘ಧಾತ್ರೀ’ (The-Three) ಎಂಬ ವಿನೂತನ ತಂತ್ರಾಂಶ ವೇದಿಕೆಯನ್ನು ಪರಿಚಯಿಸಲಾಗುತ್ತಿದೆ. ಹಸಿರು ಮತ್ತು ಸ್ವಚ್ಛತಾ ಯೋಜನೆಗಳ ಯೋಜನೆ ರೂಪಿಸುವಿಕೆ, ಸಸಿ ನೆಡುವಿಕೆ, ಸಂರಕ್ಷಣೆ, ವಿಸ್ತರಣೆ ಹಾಗೂ ಮಾಹಿತಿಯ ನಿರ್ವಹಣೆ ಸೇರಿದಂತೆ ಎಲ್ಲಾ ಹಂತಗಳನ್ನು ಡಿಜಿಟಲ್ ಮೂಲಕ ನಿರ್ವಹಿಸಲು ಈ ತಂತ್ರಾಂಶ ನೆರವಾಗಲಿದೆ.
ಇದೇ ವೇಳೆ ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ’ ಮಿಷನ್ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ವೀಡಿಯೊ ಸಂವಾದದ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಜ್ಯದ ಪರಿಸರ ಸಂರಕ್ಷಣೆ, ಹಸಿರು ಹೊದಿಕೆ ವಿಸ್ತರಣೆ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ಜನಸಾಮಾನ್ಯರು, ಸರ್ಕಾರಿ ಸಂಸ್ಥೆಗಳು, ನ್ಯಾಯಾಂಗ ವ್ಯವಸ್ಥೆ ಹಾಗೂ ಸಾಮಾಜಿಕ ಸಂಘಟನೆಗಳನ್ನು ಒಗ್ಗೂಡಿಸುವ ಮಹತ್ವದ ಹೆಜ್ಜೆಯಾಗಿ ಈ ಅಭಿಯಾನವನ್ನು ಪರಿಗಣಿಸಲಾಗಿದೆ.




