
ಚೆನೈ, ಫೆ.03: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಬಿಜೆಪಿ ನಾಯಕ ಅಣ್ಣಾಮಲೈ ಅವರಿಗೆ ನೀಡಲಾಗಿದ್ದ ಚುನಾವಣಾ ಉಸ್ತುವಾರಿ ಜವಾಬ್ದಾರಿಯಿಂದ ಹೊರಬಂದು ರಾಜೀನಾಮೆ ನೀಡಿದ್ದಾರೆ. ಪಕ್ಷವು ಅವರಿಗೆ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಹೊಣೆಗಾರಿಕೆಯನ್ನು ವಹಿಸಿತ್ತು.
ರಾಜಿನಾಮೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಆರು ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿ ನನಗೆ ನೀಡಲಾಗಿತ್ತು. ಆದರೆ ನನ್ನ ತಂದೆಗೆ ಅನಾರೋಗ್ಯವಿರುವುದರಿಂದ ಕೊಯಂಬತ್ತೂರಿನಲ್ಲೇ ಉಳಿಯಬೇಕಾದ ಪರಿಸ್ಥಿತಿ ಇದೆ. ತಂದೆಯ ಆರೈಕೆ ಮತ್ತು ಆರೋಗ್ಯ ಕಾಳಜಿಯೇ ನನ್ನ ಪ್ರಮುಖ ಆದ್ಯತೆಯಾಗಿರುವ ಕಾರಣ, ವಿವಿಧ ಕ್ಷೇತ್ರಗಳಿಗೆ ನಿರಂತರವಾಗಿ ಪ್ರವಾಸ ಮಾಡಿ ಜವಾಬ್ದಾರಿಗಳನ್ನು ನಿಭಾಯಿಸುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಉಸ್ತುವಾರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಮೈತ್ರಿಯಾಗಿ ಸ್ಪರ್ಧಿಸುತ್ತಿವೆ. ಬಿಜೆಪಿ ಸ್ಪರ್ಧಿಸುತ್ತಿರುವ 41 ವಿಧಾನಸಭಾ ಕ್ಷೇತ್ರಗಳಿಗೆ ಹಿರಿಯ ನಾಯಕರನ್ನು ಚುನಾವಣಾ ಉಸ್ತುವಾರಿಗಳಾಗಿ ನೇಮಕ ಮಾಡಲಾಗಿದೆ. ಈ ಪೈಕಿ ಅಣ್ಣಾಮಲೈ ಅವರಿಗೆ ಸಿಂಗನಲ್ಲೂರು, ಮದುರೆ ದಕ್ಷಿಣ, ವಿರುಂಗಂಪಾಕಂ, ಕಾರೈಕುಡಿ, ಶ್ರೀವೈಕಂಠಮ್ ಮತ್ತು ಪದ್ಮನಾಭಪುರಂ ಕ್ಷೇತ್ರಗಳ ಉಸ್ತುವಾರಿ ನೀಡಲಾಗಿತ್ತು.
ಇದೇ ವೇಳೆ, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಣ್ಣಾಮಲೈ, ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಪಕ್ಷದ ತೀರ್ಮಾನಕ್ಕೆ ಅನುಗುಣವಾಗಿ ಘೋಷಣೆ ಮಾಡುತ್ತೇನೆ ಎಂದು ಹೇಳಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕುರಿತು ಉಲ್ಲೇಖಿಸಿದ ಅವರು, ಕೊಯಂಬತ್ತೂರಿನ ಜನತೆಗೆ ಯಾವಾಗಲೂ ಲಭ್ಯವಾಗಬೇಕೆಂಬ ಉದ್ದೇಶದಿಂದ ಸದ್ಯ ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಜನರ ಮನವಿಗಳು ಹಾಗೂ ದೂರುಗಳಿಗೆ ತಕ್ಷಣ ಸ್ಪಂದಿಸಲು ಇದು ಸಹಕಾರಿಯಾಗುತ್ತದೆ. ಮುಂದಿನ ಎಲ್ಲ ನಿರ್ಧಾರಗಳೂ ಪಕ್ಷದ ಸೂಚನೆಯಂತೆ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.





