
ಜೈಪುರ, ಮಾ.14: ವರದಕ್ಷಿಣೆ ಆಸೆಗಾಗಿ ಸೊಸೆಯಂದಿರಿಗೆ ಕಿರುಕುಳ ನೀಡುವ ಕುಟುಂಬಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜಸ್ಥಾನ ಸರ್ಕಾರ ಮುಂದಾಗಿದೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಕುಟುಂಬಗಳಿಗೆ ಎಲ್ಪಿಜಿ ಸಿಲಿಂಡರ್ ಪೂರೈಕೆಯನ್ನು ಸ್ಥಗಿತಗೊಳಿಸುವುದಾಗಿ ಸರ್ಕಾರ ಘೋಷಿಸಿದೆ.
ರಾಜಸ್ಥಾನ ಪೊಲೀಸರು ತಮ್ಮ ಅಧಿಕೃತ ‘X’ (ಟ್ವಿಟರ್) ಖಾತೆಯ ಮೂಲಕ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ತನಿಖೆಯಲ್ಲಿ ಕಿರುಕುಳ ಸಾಬೀತಾದಲ್ಲಿ, ಸಂಬಂಧಪಟ್ಟ ಕುಟುಂಬಕ್ಕೆ ಗ್ಯಾಸ್ ಸಿಲಿಂಡರ್ ಸೌಲಭ್ಯವನ್ನು ರದ್ದುಗೊಳಿಸಲಾಗುವುದು,” ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಪಿಡುಗಾದ ವರದಕ್ಷಿಣೆ ಕಿರುಕುಳವನ್ನು ನಿಯಂತ್ರಿಸಲು ಅಗತ್ಯ ಸೇವೆಗಳನ್ನೇ ಅಸ್ತ್ರವಾಗಿ ಬಳಸುವ ಮೂಲಕ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿಸಲಾಗಿದೆ.
ಈ ಹೊಸ ನಿಯಮವನ್ನು ಯಾವ ದಿನಾಂಕದಿಂದ ಜಾರಿಗೆ ತರಲಾಗುವುದು ಎಂಬುದನ್ನು ಇನ್ನೂ ಅಧಿಕೃತವಾಗಿ ಘೋಷಿಸಲಾಗಿಲ್ಲ. ಆದರೆ ಈಗಾಗಲೇ ವರದಕ್ಷಿಣೆ ಕಿರುಕುಳದ ದೂರು ದಾಖಲಾಗಿರುವ ಮನೆಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದು, ಶೀಘ್ರದಲ್ಲೇ ಈ ನಿಯಮವನ್ನು ಜಾರಿಗೆ ತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.





