ಕಾರ್ತಿಗೈ ದೀಪಂ ಪ್ರಕರಣ; ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

0
12
Advertisement

ನವದೆಹಲಿ, ಜ.29: ಮದುರೈನ ತಿರುಪ್ಪರಂಕುಂಡ್ರಂ ಬೆಟ್ಟದ ದೇವಾಲಯದಲ್ಲಿ ‘ಕಾರ್ತಿಗೈ ದೀಪಂ’ ಬೆಳಗಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರೆಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಸಂಬಂಧ ಬುಧವಾರ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ. ವರಾಳೆ ಅವರನ್ನೊಳಗೊಂಡ ಪೀಠವು ತಮಿಳುನಾಡು ಸರ್ಕಾರ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಚೆನ್ನೈ ಪೊಲೀಸ್ ಆಯುಕ್ತರು ಹಾಗೂ ಇತರರಿಂದ ಪ್ರತಿಕ್ರಿಯೆ ಕೇಳಿದೆ. ಈ ಪ್ರಕರಣದಲ್ಲಿ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿರುವ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಫೆಬ್ರವರಿ 2ಕ್ಕೆ ನಿಗದಿಪಡಿಸಿದೆ.

ತಮಿಳುನಾಡು ಬಿಜೆಪಿ ಕಾನೂನು ಘಟಕದ ಉಪಾಧ್ಯಕ್ಷರಾದ ವಕೀಲ ಜಿ.ಎಸ್. ಮಣಿ ಸಲ್ಲಿಸಿರುವ ಪಿಐಎಲ್‌ನಲ್ಲಿ, ನ್ಯಾಯಮೂರ್ತಿ ಸ್ವಾಮಿನಾಥನ್ ಅವರ ವಿರುದ್ಧ ಜಾತಿ ಮತ್ತು ಧರ್ಮ ಆಧಾರಿತ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಇಂತಹ ಹೇಳಿಕೆಗಳು ಸಮಾಜದ ಸೌಹಾರ್ದತೆಯನ್ನು ಹಾಳು ಮಾಡುವುದರ ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾಮುದಾಯಿಕ ಅಶಾಂತಿಗೆ ಕಾರಣವಾಗುವ ಉದ್ದೇಶದಿಂದ ನಡೆದಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಕಳೆದ ವರ್ಷದ ಡಿಸೆಂಬರ್ 1ರಂದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ತಿರುಪ್ಪರಂಕುಂಡ್ರಂ ಬೆಟ್ಟದ ಮೇಲಿರುವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಬಳಿ ಇರುವ ದೀಪಸ್ತಂಭದ ಮೇಲೆ ಸಾಂಪ್ರದಾಯಿಕ ‘ಕಾರ್ತಿಗೈ ದೀಪಂ’ ಬೆಳಗಲು ಅನುಮತಿ ನೀಡಿದ್ದರು. ಈ ಆದೇಶದ ಬಳಿಕ ವಿವಿಧ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಬೆಂಬಲಿತ ಪ್ರತಿಭಟನೆಗಳು ಆರಂಭವಾಗಿದ್ದವು.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರ ಆದೇಶದ ಹಿನ್ನೆಲೆಯಲ್ಲಿ ನಡೆದ ಪ್ರತಿಭಟನೆಗಳಲ್ಲಿ ಅವರ ವಿರುದ್ಧ ಪಕ್ಷಪಾತದ ಆರೋಪ ಸೇರಿದಂತೆ ಜಾತಿ ಮತ್ತು ಧರ್ಮ ಆಧಾರಿತ ಹೇಳಿಕೆಗಳನ್ನು ನೀಡಲಾಗಿದೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ಡಿಎಂಕೆ ಬೆಂಬಲಿತ ಪಕ್ಷಗಳು ಹಾಗೂ ಕಮ್ಯುನಿಸ್ಟ್ ಪಕ್ಷಗಳು ಸಾರ್ವಜನಿಕ ಸ್ಥಳಗಳಲ್ಲಷ್ಟೇ ಅಲ್ಲದೆ ಚೆನ್ನೈ ಮತ್ತು ಮದುರೈನ ಮದ್ರಾಸ್ ಹೈಕೋರ್ಟ್ ಆವರಣದಲ್ಲಿಯೂ ಅಕ್ರಮ ಪ್ರತಿಭಟನೆಗಳನ್ನು ನಡೆಸಿ, ನ್ಯಾಯಮೂರ್ತಿ ವಿರುದ್ಧ ನ್ಯಾಯಾಲಯದ ಅವಮಾನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪವೂ ಮಾಡಲಾಗಿದೆ.

Advertisement

LEAVE A REPLY

Please enter your comment!
Please enter your name here