
ಬೆಂಗಳೂರು, ನ.29: ಕರ್ನಾಟಕದ ಕಾಂಗ್ರೆಸ್ ಸರಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಇದ್ದಂತಹ ಗೊಂದಲಕ್ಕೆ ತಾತ್ಕಾಲಿಕ ವಿರಾಮ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಡೆಸಿದ ಜಂಟಿ ಸುದ್ದಿಗೋಷ್ಟಿಯಲ್ಲಿ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ , ಗೊಂದಲಗಳಿಲ್ಲ, ನಮ್ಮಿಬ್ಬರದ್ದು ಒಂದೇ ತೀರ್ಮಾನ, ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ ಎಂದು ಹೇಳಿದರು.
ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿದ ನಂತರದಲ್ಲಿ ಸಿಎಂ ನಿವಾಸ ಕಾವೇರಿಯಲ್ಲಿ ಜಂಟಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತಾಡಿದರು. ರಾಜಕೀಯವಾಗಿ ನಮ್ಮಿಬ್ಬರದ್ದು ಒಂದೇ ತೀರ್ಮಾನ. ನಾವು ಯಾವುದೇ ಗುಂಪಿಗೂ ಸೇರಿಲ್ಲ, ನಮ್ಮದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು. ಪಕ್ಷದ ವರಿಷ್ಠರು, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ತೀವ್ರ ಚರ್ಚೆಯಾಗಿತ್ತು. ನವೆಂಬರ್ ಕ್ರಾಂತಿ ಎಂಬ ಹೆಸರಲ್ಲಿ ಎರಡು ಬಣಗಳಿಂದ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಪರ- ವಿರೋಧ ಅಭಿಪ್ರಾಯಗಳು ಭಾರಿ ಸಂಚಲನ ಮೂಡಿಸಿದ್ದವು. ಇದಕ್ಕೆ ಪ್ರತಿಯಾಗಿ ಇಬ್ಬರು ಒಟ್ಟಾಗಿ ಪತ್ರಿಕಾಗೋಷ್ಟಿ ನಡೆಸಿದ್ದು ಗೊಂದಲಗಳಿಗೆ ತಾತ್ಕಾಲಿಕವಾಗಿ ತೆರೆ ಎಳೆದಂತಾಗಿದೆ.





