ಬಳ್ಳಾರಿ, ಜು.17: ಲಡಾಖ್ನ ಸಾಮಾಜಿಕ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಅವರ ಜೀವ ಮತ್ತು ಆರೋಗ್ಯದ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಕೋರಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್ಎಚ್ಆರ್ಸಿ) ದೂರು ಸಲ್ಲಿಸಲಾಗಿದೆ.
ಬಳ್ಳಾರಿಯ ವಕೀಲ ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತ ಶಿವಶಂಕರ ಅವರು ಸಾರ್ವಜನಿಕ ಹಿತಾಸಕ್ತಿಯಿಂದ ಈ ದೂರು ದಾಖಲಿಸಿದ್ದು, ಉಪವಾಸ ಸತ್ಯಾಗ್ರಹದ ವೇಳೆ ವಾಂಗ್ಚುಕ್ ಅವರ ಜೀವಕ್ಕೆ ಯಾವುದೇ ಅಪಾಯ ಉಂಟಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

ಅಲ್ಲದೆ, ವಾಂಗ್ಚುಕ್ ಅವರಿಗೆ ನಿರಂತರ ವೈದ್ಯಕೀಯ ತಪಾಸಣೆ ಮತ್ತು ಅಗತ್ಯ ಚಿಕಿತ್ಸೆ ಒದಗಿಸುವುದನ್ನು ಖಚಿತಪಡಿಸಬೇಕು. ಜೊತೆಗೆ, ಶಾಂತಿಯುತ ಸಂವಾದದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಾನವ ಹಕ್ಕುಗಳ ಆಯೋಗವನ್ನು ಕೋರಲಾಗಿದೆ.
ಈ ದೂರು ಯಾವುದೇ ವೈಯಕ್ತಿಕ ಹಿತಾಸಕ್ತಿಯಿಂದ ಸಲ್ಲಿಸಿಲ್ಲ. ಮಾನವ ಜೀವದ ರಕ್ಷಣೆ ಹಾಗೂ ಮಾನವ ಹಕ್ಕುಗಳ ಸಂರಕ್ಷಣೆಯ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಯಲ್ಲಿ ಈ ಮನವಿ ಸಲ್ಲಿಸಲಾಗಿದೆ ಎಂದು ಶಿವಶಂಕರ ತಿಳಿಸಿದ್ದಾರೆ.




