
ಬೆಂಗಳೂರು, ಜ.29: ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಪ್ರಸ್ತಾವನೆಯನ್ನು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ತಿಳಿಸಿದರು.
ತುಳು ಭಾಷೆಯ ಸ್ವರೂಪ, ಇತಿಹಾಸ, ಸಾಹಿತ್ಯ ಪರಂಪರೆ, ತುಳು ಲಿಪಿ, ಪ್ರಾಚೀನ ಹಾಗೂ ಆಧುನಿಕ ತುಳು ಸಾಹಿತ್ಯ, ಸಂಸ್ಕೃತಿ ಮತ್ತು ತುಳು ಶಾಸನಗಳ ಕುರಿತು ಅಧ್ಯಯನ ನಡೆಸಲು ಡಾ. ಮೋಹನ್ ಆಳ್ವಾರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿ 2023ರ ಫೆಬ್ರವರಿಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ ಎಂದು ಸಚಿವರು ಹೇಳಿದರು.
ಹೆಚ್ಚುವರಿ ಅಧಿಕೃತ ಭಾಷೆಗಳಿಗೆ ಸಂಬಂಧಿಸಿದಂತೆ ಕೆಲವು ನಿಬಂಧನೆಗಳನ್ನು ಜಾರಿಗೆ ತಂದಿರುವ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಪತ್ರ ಬರೆದಿದೆ. ಉರ್ದುವನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಘೋಷಿಸಿರುವ ಆಂಧ್ರಪ್ರದೇಶಕ್ಕೆ ಅಧ್ಯಯನಕ್ಕಾಗಿ ರಾಜ್ಯದ ತಂಡವೊಂದು ಭೇಟಿ ನೀಡಿದೆ. ಈ ಕುರಿತು ಶೀಘ್ರ ಸಭೆ ಕರೆಯಲಾಗುವುದು. ತುಳು ಮಾತನಾಡುವ ಪ್ರದೇಶದ ಎಲ್ಲಾ ಶಾಸಕರನ್ನೂ ಸಭೆಗೆ ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ತುಳು ಭಾಷೆಗೆ ಸುಮಾರು 3,000 ವರ್ಷಗಳ ಇತಿಹಾಸವಿದ್ದು, ಅನುವಾದಕ್ಕಾಗಿ ಗೂಗಲ್ನಿಂದಲೂ ಗುರುತಿಸಲ್ಪಟ್ಟಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಭೆಯಲ್ಲಿ ಉಲ್ಲೇಖಿಸಿದರು. ಜರ್ಮನಿ ಹಾಗೂ ಫ್ರಾನ್ಸ್ನಲ್ಲಿಯೂ ತುಳು ಅಧ್ಯಯನಕ್ಕೆ ಅವಕಾಶವಿದೆ. ಕೆಲ ವಿಶ್ವವಿದ್ಯಾಲಯಗಳು ತುಳು ಮಾಧ್ಯಮದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿವೆ ಎಂದರು.





