ಮಡಿಕೇರಿ: ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಕೊಡಗಿನ ವಿರಾಜಪೇಟೆಯಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್ ಖ್ಯಾತ ಬರಹಗಾರ್ತಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಪಡೆದ ವ್ಯಕ್ತಿ ಎಂದು ಹೇಳಿದರು. ಜೊತೆಗೆ, ಸಾಮಾಜಿಕ ಹೋರಾಟದಲ್ಲಿ ತಮ್ಮದೇ ಆದ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನ ಹಕ್ಕು ನೀಡಬೇಕು, ಮಸೀದಿಗಳಿಗೆ ಪ್ರವೇಶ ನೀಡಬೇಕು ಎಂದು ಆಗ್ರಹಿಸಿದ ಕಾರಣಕ್ಕೆ ಅವರು ಸಾಮಾಜಿಕ ಬಹಿಷ್ಕಾರವನ್ನೂ ಎದುರಿಸಿದ್ದರು ಎಂದು ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಅವರನ್ನು ಉದ್ಘಾಟಕರಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ತಹಶೀಲ್ದಾರ್ ಕಚೇರಿಗೆ ರೈತರ ಮುತ್ತಿಗೆ ಬೆಳೆ ನಷ್ಟಕ್ಕೆ ಪರಿಹಾರ ಬೇಡಿಕೆ
ಈ ಬಗ್ಗೆ ಬಿಜೆಪಿ ನಾಯಕರು ವ್ಯಕ್ತಪಡಿಸಿರುವ ವಿರೋಧದ ಕುರಿತು ಪ್ರತಿಕ್ರಿಯಿಸಿದ ಯದುವೀರ್ ಒಡೆಯರ್, “ಸರ್ಕಾರಿ ಕಾರ್ಯಕ್ರಮದಲ್ಲಿ ಧಾರ್ಮಿಕ ಪೂಜೆ ಇರುವುದೇ ಇಲ್ಲ. ಇದು ಜಾತ್ಯತೀತ ವ್ಯವಸ್ಥೆಯಾಗಿದೆ. ಧಾರ್ಮಿಕ ಪೂಜೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದು ಒಂದು ಉತ್ಸವ, ಆದ್ದರಿಂದ ಅವರ ಆಯ್ಕೆ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ” ಎಂದು ತಿಳಿಸಿದ್ದಾರೆ.
